ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ.

      ಪ್ರಕರಣದ ಕುರಿತು ವಿಚಾರಣೆ ನಡೆಸಿದ ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ವಿಚಾರಣೆಯನ್ನು ಮುಂದೂಡಿದ್ದಾರೆ.

      ಪ್ರಕರಣ ಸಂಬಂಧ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಅವರು ಮೇ 15ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

      ಕವಿತಾ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಈಚೆಗೆ ದೆಹಲಿ ಹೈಕೋರ್ಟ್‌ನಲ್ಲಿ ವಿರೋಧಿಸಿದ್ದವು. ಸಿಬಿಐ ಮತ್ತು ಇಡಿ ‘ಕವಿತಾ ಅವರು ಹೆಚ್ಚು ಪ್ರಭಾವಿ ಮತ್ತು ಶಕ್ತಿಯುತರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು’ ಎಂದು ಹೇಳಿದ್ದವು.

      ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿ 18 ಮಂದಿಯನ್ನು ಬಂಧಿಸಿದೆ. ಜೊತೆಗೆ ಈ ಪ್ರಕರಣ ಸಂಬಂಧ ಇ.ಡಿ ಈವರೆಗೆ 7 ಆರೋಪ ಪಟ್ಟಿಗಳನ್ನು ಸಲ್ಲಿಸಿದೆ.

      ಮಾ.15ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು. ಇವರು ನ್ಯಾಯಾಂಗ ಬಂಧನದಲ್ಲಿ ಇದ್ದ ಅವಧಿಯಲ್ಲೇ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ, ಕವಿತಾ ಅವರನ್ನು ಬಂಧಿಸಿತ್ತು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ