ಫಲಿತಾಂಶ ತೃಪ್ತಿ ತಂದಿದೆ: ಡಿಕೆಶಿ; ನಾವೇ ಮೇಲುಗೈ: ಬಿಜೆಪಿ

ಬೆಂಗಳೂರು ಜನವರಿ 1: ಎರಡು ಹಂತಗಳಲ್ಲಿ ನಡೆದ ರಾಜ್ಯದ 226 ತಾಲ್ಲೂಕುಗಳ 5,728 ಗ್ರಾಮ ಪಂಚಾಯಿತಿಗಳ 82,576 ಸ್ಥಾನಗಳಿಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶಗಳು ಪ್ರಕಟವಾಗಿದೆ. ಪಕ್ಷ ರಹಿತವಾದ ಚುನಾವಣೆಯಾದರೂ ರಾಜಕೀಯ ಪಕ್ಷಗಳ ನೇತಾರರು ಗೆದ್ದ ಅಭ್ಯರ್ಥಿಗಳ ಬಗ್ಗೆ ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಲಭ್ಯ ಮಾಹಿತಿಯಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುಂಚೂಣಿಯಲ್ಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಂತರದ ಸ್ಥಾನದಲ್ಲಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 36,735 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 32,463 ಸ್ಥಾನಗಳನ್ನು ಪಡೆದಿವೆ ಆಯಾ ಪಕ್ಷದ ಮೂಲಗಳು ಹೇಳಿಕೊಂಡಿವೆ. ಒಟ್ಟು 91,339 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿತ್ತು. ಈ ಪೈಕಿ, 8,153 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದರೆ, 610 ಸ್ಥಾನಗಳಿಗೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದುದರಿಂದ ಚುನಾವಣೆ ನಡೆದಿಲ್ಲ.
ಪಕ್ಷಗಳ ಚಿಹ್ನೆ ಇಲ್ಲದೆ ‘ಪಕ್ಷರಹಿತ’ವಾಗಿ ಚುನಾವಣೆ ನಡೆದಿದ್ದರೂ, ತಮ್ಮ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಪಕ್ಷ ತಳಮಟ್ಟದಲ್ಲೂ ಸ್ಥಿರ, ದೃಢವಾಗಿರುವುದನ್ನು ಕಾರ್ಯಕರ್ತರು ತೋರಿಸಿದ್ದಾರೆ ಎಂದು ಜೆಡಿಎಸ್ ನಾಯಕರು ಪ್ರತಿಪಾದಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶೇ 55ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾದಿಸಿದರೆ, ‘ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಫಲಿತಾಂಶ ನನಗೆ ಸಮಾಧಾನ ಇದೆ. ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರಿಂದ ಸಂಪೂರ್ಣ ವರದಿ ತರಿಸಿಕೊಳ್ಳುತ್ತಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶೇ.60ರಷ್ಟು ಸ್ಥಾನಗಳು ಬಿಜೆಪಿ ಪಾಲಾಗಿದೆ ಎಂದ ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರೂ ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಅಲುಗಾಡಿತ್ತಿದೆ. ಅಧಿಕಾರ ಉಳಿಸಿಕೊಳ್ಳುವ ಆಸೆಗಾಗಿ ಇಂತಹ ಸುಳ್ಳು ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷದ ಚಿಹ್ನೆಯ ಆಧಾರದಲ್ಲಿ ನಡೆಯುವುದಿಲ್ಲ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಮಾಹಿತಿ ಪಡೆದ ನಂತರ ನಮ್ಮ ಪಕ್ಷದ ಸಂಖ್ಯೆಯೂ ತಿಳಿಯುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಈ ಬಾರಿ ತನ್ನ ಸಾಂಪ್ರದಾಯಿಕ ಮತಗಳನ್ನೂ ಕಳೆದುಕೊಂಡಿದೆ. ಎಸ್ಡಿಪಿಐ ಗೆಲುವುಗಳೇ ಇದಕ್ಕೆ ಸಾಕ್ಷಿ ಎಂದು ಕಟೀಲ್ ಹೇಳಿದರು. ಎಪಿಎಂಸಿ ತಿದ್ದುಪಡಿ ಕಾಯ್ದೆಯ ಮೂಲಕ ಕಾಂಗ್ರೆಸ್ ಅಪಪ್ರಚಾರಕ್ಕೆ ಯತ್ನಿಸಿತು. ಆದರೆ, ಜನತೆ ಮತ್ತೊಮ್ಮೆ ಬಿಜೆಪಿ ಬೆಂಬಲಿಸಿದ್ದಾರೆ. ಇದಕ್ಕೆ ಬಿಜೆಪಿಯ ಕಾರ್ಯಕರ್ತರ ಶ್ರಮದ ಜೊತೆಗೆ ಸಂಘಟಿತ ಪ್ರಚಾರ, ಪಂಚತಂತ್ರ, ಪೇಜ್ ಪ್ರಮುಖ್, ಶಕ್ತಿ ಕೇಂದ್ರ, ಕುಟುಂಬ ಮಿಲನ್, ಗ್ರಾಮ ಸ್ವರಾಜ್ಯ ಮತ್ತಿತರ ಕಾರ್ಯಕ್ರಮಗಳೂ ಕಾರಣ ಎಂದು ಕಟೀಲ್ ವಿಶ್ಲೇಷಿಸಿದ್ದಾರೆ.
ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಯಾರು ಅಧಿಕಾರ ಹಿಡಿಯಲಿದ್ದಾರೆ ಎನ್ನುವುದು ನಿಮಗೆ ಗೊತ್ತಾಗಲಿದೆ. ಮೀಸಲಾತಿ ಬಳಸಿ ಗ್ರಾಮ ಪಂಚಾಯಿತಿಗಳ ಆಡಳಿತ ಹಿಡಿಯಲು ಬಿಜೆಪಿ ಮುಂದಾಗಬಾರದು ಎಂದು ಡಿಕೆಶಿ ಎಚ್ಚರಿಕೆ ನೀಡಿದ್ಧಾರೆ. ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್ ಗಮನಾರ್ಹ ಸಾಧನೆ ಮಾಡಿದೆ. ರಾಜಕೀಯ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ ಫಲವಾಗಿ ನಮ್ಮ ಅಭ್ಯರ್ಥಿಗಳು ಜಯಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಅಧ್ಯಕ್ಷರ ಆಯ್ಕೆ ತಿಂಗಳೊಳಗೆ ಪೂರ್ಣ:
ಶಿವಮೊಗ್ಗ: ತಿಂಗಳ ಒಳಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಬಳಿಕ ಅವರಿಗೆ ಕ್ರಿಯಾಯೋಜನೆ ಸಿದ್ಧಪಡಿಸುವಿಕೆ ಕುರಿತು ತರಬೇತಿ ನೀಡಲಾಗುವುದು. ಗ್ರಾಮ ಪಂಚಾಯಿತಿ ವ್ಯವಸ್ಥೆ ಬಲಪಡಿಸಲು ನಿರಂತರ ತರಬೇತಿ ಹಮ್ಮಿಕೊಳ್ಳಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ರಾಜ್ಯದ 92,131 ಸದಸ್ಯರಿಗೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಿಂದ ಜನವರಿ 19ರಿಂದ ಮಾರ್ಚ್ 26ರ ವರೆಗೆ ತಾಲ್ಲೂಕು ಹಂತದಲ್ಲಿ ತರಬೇತಿ ನೀಡಲಾಗುವುದು. ರಾಜ್ಯದ 176 ತಾಲ್ಲೂಕುಗಳ 285 ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಕೆಲವು ಕಡೆ ಎರಡು ಕೇಂದ್ರಗಳನ್ನು ಗುರುತಿಸಲಾಗಿದೆ. 900 ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ. 40 ಸದಸ್ಯರಿಗೆ ಒಂದು ತಂಡ ರಚಿಸಲಾಗಿದೆ. ಪ್ರತಿ ತಂಡಕ್ಕೆ 5 ದಿನ ಕಾಲ ತರಬೇತಿ ನೀಡಲಾಗುವುದು ಎಂದರು.
ಪ್ರತಿ ದಿನ ಬೆಳಿಗ್ಗೆ 10.30ರಿಂದ ಸಂಜೆ 4ರ ವರೆಗೆ ತರಬೇತಿ ನಡೆಯಲಿದೆ. 15 ವಿಷಯಾಧಾರಿತ ಅಧಿವೇಶನಗಳು ಮತ್ತು ಕೌಶಲ ಮಾಹಿತಿ ನೀಡಲಾಗುವುದು. ಸದಸ್ಯರಿಗೆ ಪ್ರಯಾಣ ಭತ್ಯೆ, ಭಾಗವಹಿಸುವಿಕೆ ಭತ್ಯೆ ನೀಡಲಾಗುವುದು. ತರಬೇತಿಗೆ ಅಂದಾಜು ₹ 27.16 ಕೋಟಿ ವೆಚ್ಚವಾಗಲಿದೆ. ಕೇಂದ್ರ ಸರ್ಕಾರ ಶೇ 60ರಷ್ಟು ವೆಚ್ಚ ಭರಿಸಲಿದೆ ಎಂದು ಅವರು ವಿವರ ನೀಡಿದರು.
ಗ್ರಾಮ ಪಂಚಾಯಿತಿ ಚುನಾವಣೆ: ಪಕ್ಷಗಳ ವಾದ
ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ