ಬಿಜೆಪಿಯಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನ: ಮಮತಾ ಬ್ಯಾನರ್ಜಿ

ಬಿಜೆಪಿಯಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನ: ಮಮತಾ ಬ್ಯಾನರ್ಜಿ

ಕೋಲ್ಕತ್ತ: 'ಮಾಧ್ಯಮಗಳಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಅಪಪ್ರಚಾರ ನಡೆಸಲಾಗಿದೆ' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

     ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಮಮತಾ, 'ನಮ್ಮ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ನಾನು ಮಾಡಿದ ಭಾಷಣದಲ್ಲಿ ಉಲ್ಲೇಖಿಸಿದ ಕೆಲವು ವಿಷಯಗಳನ್ನು ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ದುರುದ್ದೇಶದೊಂದಿಗೆ ತಪ್ಪು ಮಾಹಿತಿ ಹಂಚಿದ್ದಾರೆ' ಎಂದು ಹೇಳಿದ್ದಾರೆ.

      'ವೈದ್ಯಕೀಯ ಅಥವಾ ವಿದ್ಯಾರ್ಥಿಗಳ ಹೋರಾಟದ ವಿರುದ್ಧ ನಾನು ಒಂದೇ ಒಂದು ಪದವನ್ನು ಆಡಿಲ್ಲ ಎಂದು ಸ್ಪಷ್ಟಪಡಿಸಲು ಬಯುಸುತ್ತೇನೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಅವರ ಹೋರಾಟ ಪ್ರಾಮಾಣಿಕವಾಗಿದೆ. ನಾನು ಅವರಿಗೆ ಬೆದರಿಕೆ ಹಾಕಿಲ್ಲ. ಆದರೆ ಈ ಕುರಿತು ನನ್ನ ಮೇಲೆ ಆಪಾದನೆ ಹೊರಿಸಲಾಗಿದ್ದು, ಇದು ಸತ್ಯಕ್ಕೆ ದೂರವಾದ ಮಾತು' ಎಂದು ಹೇಳಿದ್ದಾರೆ.

     ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಬೆದರಿಕೆ: ಮಮತಾ

      'ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ವಿರುದ್ಧ ಧ್ವನಿ ಎತ್ತಿದ್ದೇನೆ' ಎಂದು ಸ್ಪಷ್ಟನೆ ನೀಡಿದ್ದಾರೆ.

      'ಶ್ರೀ ರಾಮಕೃಷ್ಣ ಪರಮಹಂಸರ ಹೇಳಿಕೆಯನ್ನು ನಾನು ಭಾಷಣದಲ್ಲಿ ಉಲ್ಲೇಖಿಸಿದ್ದೇನೆ. ಒಮ್ಮೊಮ್ಮೆ ಧ್ವನಿ ಎತ್ತುವ ಅಗತ್ಯವಿದೆ ಎಂದು ಸಂತರು ಹೇಳಿದ್ದರು. ಅಪರಾಧ ಹಾಗೂ ಕ್ರಿಮಿನಲ್ ಅಪರಾಧಗಳು ನಡೆದಾಗ ಪ್ರತಿಭಟನೆಯ ಧ್ವನಿ ಎತ್ತಬೇಕು' ಎಂದು ಅವರು ಹೇಳಿದ್ದಾರೆ.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ