ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಲ್ವಾ; ಮುಸ್ಲಿಂ ಹೆಣ್ಣು ಮಕ್ಕಳೂ ತಲೆ ಮೇಲೆ ಬಟ್ಟ ಹಾಕ್ಕೊಳ್ಲಿ: ಸಿದ್ದರಾಮಯ್ಯ

ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಲ್ವಾ; ಮುಸ್ಲಿಂ ಹೆಣ್ಣು ಮಕ್ಕಳೂ ತಲೆ ಮೇಲೆ ಬಟ್ಟ ಹಾಕ್ಕೊಳ್ಲಿ: ಸಿದ್ದರಾಮಯ್ಯ

ಮೈಸೂರು: ‘ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕಲ್ವಾ? ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಕಲ್ವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕಲ್ವಾ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕ್ಕೊಳ್ಲಿ ಬಿಡಿ. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

      ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ‘ಮುಸ್ಲಿಂ ಹೆಣ್ಣುಮಕ್ಕಳು ಸಮವಸ್ತ್ರದ ಬಣ್ಣದ ದುಪ್ಪಟ್ಟಾ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಕೇಳುತ್ತಿದ್ದಾರೆ. ಅದರಲ್ಲಿ ತಪ್ಪೇನಿದೆ?’ ಎಂದರು.

      ‘ರಾಜ್ಯದಲ್ಲಿ ಹಿಜಾಬ್‌ ವಿವಾದ ಹುಟ್ಟುಹಾಕಿದ್ದೇ ಬಿಜೆಪಿಯವರು. ಎರಡೂ ಧರ್ಮದವರನ್ನು ಕರೆದು ಚರ್ಚಿಸಿ ವಿವಾದಕ್ಕೆ ತೆರೆ ಎಳೆಯಬಹುದಿತ್ತು. ಆದರೆ ಉದ್ದೇಶಪೂರ್ವಕವಾಗಿ ದೊಡ್ಡದಾಗಿಸಿದ್ದಾರೆ’ ಎಂದು ದೂರಿದರು.

ಅಮಾನವೀಯ: ‘ಜಾತ್ರೆಗಳಲ್ಲಿ ಯಾರು ಬೇಕಾದರೂ ವ್ಯಾಪಾರ ಮಾಡಬಹುದು. ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ಹೇರುತ್ತಿರುವುದು ಅಮಾನವೀಯ. ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಮುಸ್ಲಿಂ ವರ್ತಕರನ್ನು ಬಹಿಷ್ಕರಿಸುವಂತೆ ಬಿಜೆಪಿಯವರೇ ವಿವಿಧ ಸಂಘಟನೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

      ‘ರಕ್ತದ ಅಗತ್ಯ ಬಿದ್ದಾಗ ಯಾವುದೇ ಜಾತಿಯವನ ರಕ್ತವನ್ನಾದರೂ ದೇಹಕ್ಕೆ ಸೇರಿಸಿಕೊಳ್ಳುತ್ತೇವೆ. ಇದೇ ಜಾತಿಯವನ ರಕ್ತ ಬೇಕು ಎಂದು ಕೇಳುತ್ತೇವಾ? ಜೀವ ರಕ್ಷಿಸಲು ರಕ್ತ ಸಿಕ್ಕರೆ ಸಾಕು ಎಂಬ ಪರಿಸ್ಥಿತಿ ಇರುತ್ತದೆ. ನಮಗೆ ಬೇಕಿರುವುದು ಮನುಷ್ವತ್ವ’ ಎಂದರು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ