ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ: ಕಾಂಗ್ರೆಸ್‌ ಆಕ್ರೋಶ

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ: ಕಾಂಗ್ರೆಸ್‌ ಆಕ್ರೋಶ

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿಚಾರವನ್ನು ಪ್ರಸ್ತಾಪಿಸಿದ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.

      ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿಚಾರವಾಗಿ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವಿಶೇಷ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಾಸಿವೆ ಇಲ್ಲದ ಮನೆ ಇಲ್ಲ, ಬಿಜೆಪಿ ಹಗರಣ ನಡೆಸದ ಇಲಾಖೆ ಇಲ್ಲ. ಭ್ರಷ್ಟಾಚಾರವು ಬಿಜೆಪಿಯ ಕಣ ಕಣದಲ್ಲೂ ಅಡಕವಾಗಿದೆ’ ಎಂದು ವಾಗ್ದಾಳಿ ನಡೆಸಿದೆ.

      ‘ನಾವು ಆರೋಪಿಸಿದ್ದ ಅಂಬೇಡ್ಕರ್ ನಿಗಮದ ಹಗರಣ ಇಲಾಖೆಯ ಪ್ರಾಥಮಿಕ ತನಿಖೆಯಲ್ಲೇ ಬಹಿರಂಗವಾಗಿದೆ. ದಲಿತರ ಪಾಲಿನ ಹಣ ಲೂಟಿ ಹೊಡೆಯುತ್ತಿರುವ ಬಿಜೆಪಿ ಸರ್ಕಾರ ದಲಿತರ ಏಳಿಗೆ, ಅಭಿವೃದ್ಧಿಗೆ ಮಣ್ಣು ಹಾಕುತ್ತಿದೆ’ ಎಂದು ಕಿಡಿಕಾರಿದೆ.

      ಸರ್ಕಾರದ ಆದೇಶ ಉಲ್ಲಂಘಿಸಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಐದು ಸಾವಿರ ಫಲಾನು ಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆಯಡಿ ತಲಾ ₹ 50 ಸಾವಿರ ಮಂಜೂರು ಮಾಡಿ ₹ 25 ಕೋಟಿ ಅಕ್ರಮ ಎಸಗಿರುವುದೂ ಸೇರಿದಂತೆ ಭಾರಿ ಭ್ರಷ್ಟಾಚಾರ ನಡೆಸಿರುವುದು ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.

      ಅಕ್ರಮ ದೂರುಗಳು ಬಂದ ಕಾರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್‌ ಕುಮಾರ್‌ ಅವರನ್ನು ಅ. 29ರಂದು ಎತ್ತಂಗಡಿ ಮಾಡಿ ಆ ಜಾಗಕ್ಕೆ ಸುರೇಶ ನಾಯಕ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.

ನಂದನ ಟೈಮ್ಸ್ ನಿಮಗೆ ಆಪ್ತವೇ? ಇದರ ಸುದ್ಧಿಗಳು ಮತ್ತು ವಿಚಾರಗಳು ನಿಮಗೆ ನಿರಂತರವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ